ರಾಜ್ಯಾದ್ಯಂತ 50 ಕಡೆ ಲೋಕಾಯುಕ್ತ ದಾಳಿ: ದಾಖಲೆ ಪರಿಶೀಲನೆ

ಬೆಂಗಳೂರು: ರಾಜ್ಯಾದ್ಯಂತ ಏಕಕಾಲದಲ್ಲಿ 50 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,ಬ್ರಷ್ಟ ಅಧಿಕಾರಿಗಳಲ್ಲಿ ನಡುಕ ಹುಟ್ಟಿದೆ. ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ನಗರ, ಮೈಸೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಬೀದರ್, ಧಾರವಾಡ, ರಾಯಚೂರು, ಮಡಿಕೇರಿ ಮತ್ತಿತರ ನಗರಗಳಲ್ಲಿ 200 ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲೇ ಸುಮಾರು 23 ಕಡೆ ಲೋಕಾಯುಕ್ತ ರೇಡ್ ಮಾಡಿದೆ. ಮುಖ್ಯವಾಗಿ ಮಹದೇವಪುರ ವಯಲಯದ ಆರ್ ಐ ನಟರಾಜು ಅವರ ಗಿರಿ ನಗರ, ಆವಲಹಳ್ಳಿಯಲ್ಲಿರುವ ಮನೆಗಳ ಮೇಲೆ ದಾಳಿ ನಡೆದಿದೆ.

ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ BBMP ಎಇ ಹೆಚ್.ಭಾರತಿ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ.

ಜತೆಗೆ ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಅವರ​​ ಮನೆ ಮೇಲೂ ದಾಳಿ ನಡೆದಿದೆ. ಮಡಿಕೇರಿಯಲ್ಲಿ ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.

ಮಡಿಕೇರಿಯ ಫೀಲ್ಡ್‌ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ನಂಜುಂಡೇಗೌಡರ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಬೀದರ್ ಜಿಲ್ಲೆಯ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್​ಟೇಬಲ್​ ವಿಜಯಕುಮಾರ್ ಮನೆ ಮೇಲೂ ದಾಳಿ ನಡೆದಿದೆ.

ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿ ಹುಚಕನಳ್ಳಿ ಗ್ರಾಮದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು,ಅಧಿಕಾರಿಗಳು ಮಹತ್ವದ ದಾಖಲೆ ಪರಿಶೀಲಿಸುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲೂ ದಾಳಿ ನಡೆದಿದ್ದು ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಆರ್ ಎಫ್ ಒ ಸತೀಶ್ ಮನೆಗಳ ಮೇಲೆ ದಾಳಿ ಆಗಿದೆ.

ಸತೀ‌ಶ್‌ ಅವರ ಶಿವಮೊಗ್ಗದಲ್ಲಿರುವ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *