ಪೊಲೀಸ್‌ ಇಲಾಖೆಯ ದಕ್ಷತೆ, ಕಾರ್ಯಪಡೆ, ನಿಷ್ಠೆಯಿಂದ ರಾಜ್ಯಕ್ಕೆ ಗೌರವ

ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿಂದು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್‌ ಫೋರೆನ್ಸಿಕ್‌ ವ್ಯಾನ್‌ಗಳು ಹಾಗೂ 75 ಬೊಲೆರೋ ವಾಹನಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿ ಆಗಿರಲು ಅನುಕೂಲವಾಗುತ್ತಿದೆ. ಪೊಲೀಸ್‌ ಇಲಾಖೆಗೆ ವಾಹನಗಳನ್ನು ನೀಡುತ್ತಿರುವುದು ಹೊಸ ಶಕ್ತಿ ತುಂಬಲಿದೆ.

ಮಾದಕ ವಸ್ತುಗಳನ್ನು ಸೀಜ್‌ ಮಾಡಿ ಪೊಲೀಸ್ ಅಧಿಕಾರಿಗಳು ಸಾಧನೆ ಮಾಡಿದ್ದಾರೆ. ಅವರಿಗೆ ಸರ್ಕಾರದ ಪರವಾಗಿ, ರಾಜ್ಯದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.

ಪೊಲೀಸ್‌ ಅಧಿಕಾರಿಗಳು ಈಗಾಗಲೇ ಸಾವಿರಾರು ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಇದೊಂದು ದೊಡ್ಡ ದಾಖಲೆಯಾಗಿದೆ. ಕರ್ನಾಟಕ ಪೊಲೀಸ್‌ ಇಲಾಖೆ ಅಧಿಕಾರಿಗಳ ಸಾಮರ್ಥ್ಯವನ್ನು ಇಡೀ ದೇಶವೇ ಕೊಂಡಾಡುತ್ತಿದೆ. ನಿಮ್ಮಿಂದ ರಾಜ್ಯದ ಪೊಲೀಸ್ ಇಲಾಖೆಗೆ ಗೌರವ ಬಂದಿದೆ. ನಿಮ್ಮ ದಕ್ಷತೆ, ಕಾರ್ಯಪಡೆ, ನಿಷ್ಠೆಯಿಂದ ರಾಜ್ಯಕ್ಕೆ ಹೆಸರನ್ನು ತಂದಿದ್ದೀರಿ. ಹಗಲು ರಾತ್ರಿ ಕೆಲಸ ಮಾಡುವ ನಿಮ್ಮ ಪರವಾಗಿ ಸರ್ಕಾರ ನಿಲ್ಲಲಿದೆ.

ಜನರಿಗೆ ನಿಮ್ಮ ಮೇಲೆ ವಿಶ್ವಾಸ ಮೂಡುವ ರೀತಿಯಲ್ಲಿ ಕೆಲಸ ಮಾಡಿ. ಇಂದು ಎಲ್ಲಾ ಜಿಲ್ಲಾ ಘಟಕಗಳಿಗೆ ಬೊಲೆರೋ ವಾಹನಗಳನ್ನು ನೀಡುತ್ತಿದ್ದು, ಇವುಗಳಿಂದ ಅಪರಾಧಿಗಳನ್ನು ಕಂಡು ಹಿಡಿಯಲು ಅನುಕೂಲವಾಗಲಿ ಎಂದು ಶುಭಹಾರೈಸುತ್ತೇನೆ.

ಈ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಶ್ರೀ ಪ್ರಿಯಾಂಕ್‌ ಖರ್ಗೆ, ವಿಧಾನ ಪರಿಷತ್‌ ಮಾನ್ಯ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಶ್ರೀ ರಿಜ್ವಾನ್‌ ಅರ್ಷದ್, ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಸೀಮಂತ್‌ ಕುಮಾರ್‌ ಸಿಂಗ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *